Saturday 4 May 2019

ನನ್ನೊಳಗೂ ಒಂದು ಆತ್ಮವಿದೆ : ಭಾಗ 11 ಸುಬ್ಬನ ಪಾತ್ರ ಮಾಡಿದ ಹುಡುಗಿಗೆ ದೊಡ್ಡ ಭವಿಷ್ಯವಿದೆ


ಚಿತ್ರ : 1997 ರಲ್ಲಿ ಹವ್ಯಕ ಮಹಾ ಸಭೆಯಲ್ಲಿ ಅದೇ ನಾಟಕವನ್ನು ಮಾಡಿದ್ದು,ಸುಬ್ಬನ ಪಾತ್ರದಲ್ಲಿ ನಾನು ಮತ್ತು ಸುಬ್ಬಿಯ ಪಾತ್ರದಲ್ಲಿ ಪುಷ್ಪಕ್ಕ( ಖ್ಯಾತ ಡೆಂಟಿಸ್ಟ್ ಖಂಡಿಗೆ ಡಾ.ಕೃಷ್ಣ ಭಟ್ ಅವರ ಮಡದಿ)
ನನ್ನೊಳಗೂ ಒಂದು ಆತ್ಮವಿದೆ : ಭಾಗ 11
ಸುಬ್ಬನ ಪಾತ್ರ ಮಾಡಿದ ಹುಡುಗಿಗೆ ದೊಡ್ಡ ಭವಿಷ್ಯವಿದೆ
ಇಂದು ಫೇಸ್ ಬುಕ್ ಮೂಲಕ ಗೆಳೆಯರಾದ ಜಯಲಕ್ಷ್ಮಿ ಅವರು ತಾವು ಸ್ವಾಮೀಜಿಯವರು ನೀಡಿದ ನಿಂಬೆಹಣ್ಣು ಮತ್ತು ಭರವಸೆಯ ನುಡಿ ನಂಬಿ ಓದಿ ಎಸ್ ಎಸ್ ಎಲ್ ಸಿ ಯಲ್ಲಿ ಫಸ್ಟ್ ಕ್ಲಾಸ್ ನಲ್ಲಿ ಪಾಸಾದ ವಿಚಾರವನ್ನು ಹಂಚಿಕೊಂಡಿದ್ದರು‌.ತಕ್ಷಣವೇ ನನಗೂ ಇಂತಹ ಒಂದು ಪ್ರೇರಣೆ ಸಿಕ್ಕಿದ್ದು ನೆನಪಾಯಿತು.
ಆಗ ನಾನು ಎಂಟನೆಯ ತರಗತಿಯಲ್ಲಿ ಓದುತ್ತಿದ್ದೆ ಎಂದು ನೆನಪು.ನಾನು ಹಿರಿಯ ಪ್ರಾಥಮಿಕ ಶಿಕ್ಷಣವನ್ನು ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಶಾಲೆ ಮೀಯಪದವಿನಲ್ಲಿ ಪಡೆದಿದ್ದೆ.ನನ್ನ ಅಜ್ಜನ ಮನೆ ಮೀಯಪದವು ಶಾಲೆಗೆ ಹತ್ತಿರದಲ್ಲಿ ಇದೆ.ಹಾಗಾಗಿ ಎರಡನೇ ತರಗತಿಯಿಂದ ನಾಲ್ಕನೇ ತರಗತಿ ತನಕ ಕೋಳ್ಯೂರು ಶಂಕರನಾರಾಯಣ ದೇವಸ್ಥಾನ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ ಓದಿ ನಂತರ ಅಜ್ಜನ ಮನೆಯಿಂದ ಮೀಯಪದವು ಶಾಲೆಗೆ ಹೋಗಿದ್ದೆ.ಅಲ್ಲಿ ತನಕ ಸಾಮಾನ್ಯ ಹಳ್ಳಿ ಬೆಪ್ಪು ತಕ್ಕಡಿಯಾಗಿದ್ದ ನನ್ನ ಬದುಕಿನಲ್ಲಿ ಬಹು ದೊಡ್ಡ ತಿರುವು ಸಿಕ್ಕಿತು. ಅಷ್ಟರ ತನಕ ನಾನು ಕಲಿಕೆಯಲ್ಲಿ ಕೂಡ ತೀರಾ ಜಾಣ ವಿದ್ಯಾರ್ಥಿನಿ ಅಲ್ಲ.ತರಗತಿಯಲ್ಲಿ ಇದ್ದ ಹದಿನಾರು ಹದಿನೇಳು ಮಂದಿಯಲ್ಲಿ ನನಗೆ ಆರೋ ಏಳನೆಯದೋ ರ‍‍್ಯಾಂಕ್ ಬರುತ್ತಾ ಇತ್ತು.ಆರೋಗ್ಯ ಸರಿ ಇಲ್ಲದ ಕಾರಣ ಯಾವುದೇ ಆಟಗಳಲ್ಲಿ ಭಾಗವಹಿಸುತ್ತಾ ಇರಲಿಲ್ಲ ( ಈ ಬಗ್ಗೆ ಇನ್ನೊಂದು ದಿನ ಬರೆಯುವೆ) ಅಥವಾ ನನ್ನನ್ನು ಸೇರಿಸಿಕೊಳ್ಳುತ್ತಾ ಇರಲಿಲ್ಲ ಎಂದರೆ ಸರಿಯಾದೀತು.
ಐದನೇ ತರಗತಿಗೆ ಬರುವಷ್ಟರಲ್ಲಿ ನನ್ನ ತಲೆ ಹುಣ್ಣಿನ ಸಮಸ್ಯೆ ಪರಿಹಾರವಾಗಿತ್ತು‌.ಸಾವಿನ ದವಡೆಯಿಂದ ಪಾರಾಗಿದ್ದೆ‌.
ಶ್ರೀ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಣ ವಿಧಾನವೇ ಬೇರೆ,ಅಲ್ಲಿಯ ಶಿಕ್ಷಕರು ಇತರರಂತಲ್ಲ.ನಾಲಿಗೆ ಎಳೆದರೂ ಒಂದಕ್ಷರ ಬಾರದ,ಒಂದು ಹೆಜ್ಜೆ ಹಾಕಲು ಅರಿಯದ ನಮಗೆ ನಾಟಕ ಭಾಷಣ ಏಕಪಾತ್ರಾಭಿಯ ,ನೃತ್ಯ ಹೇಳಿಕೊಟ್ಡು ಬಾಲಕಲೋತ್ಸವಕ್ಕೆ ಕರೆದೊಯ್ದು ನಮಗೆ ವೇಷಭೂಷಣ ಹಾಕಿಸಿ,ಬಣ್ಣ ಹಾಕಿ ಸ್ಪರ್ಧೆಯಲ್ಲಿ ಗೆಲ್ಲುವ ಹಾಗೆ ಮಾಡುತ್ತಿದ್ದರು.ನಮಗೆ ಬಹುಮಾನ ಬಂದಾಗ ನಮ್ಮ ಶಿಕ್ಷಕರಾದ ಸರೋಜಿನಿ ಟೀಚರ್ ಶ್ರೀಧರ್ ಮಾಷ್ಟ್ರು, ಶ್ರೀನಿವಾಸ ಮಾಷ್ಟ್ರು, ವಸಂತ ಮಾಷ್ಟ್ರು ಪುಷ್ಪವಲ್ಲಿ ಟೀಚರ್ ,ನಾವಡ ಮಾಷ್ಟ್ರು ಸೇರಿದಂತೆ ಎಲ್ಲರೂ ತಮಗೆ ರಾಷ್ಟ್ರ ಪ್ರಶಸ್ತಿ ಬಂದ ಹಾಗೆ ಸಂಭ್ರಮಿಸುತ್ತಾ ಇದ್ದರು.ನಾನು ಏಳನೇ ತರಗತಿಯಲ್ಲಿ ಇದ್ದಾಗ ಪಿಳ್ಳಂಗೋವಿಯ ಚೆಲುವ ಕೃಷ್ಣನ.. ಹಾಡಿಗೆ ನೃತ್ಯ ಸಂಯೋಜನೆ ಮಾಡಿ ಹೇಳಿ ಕೊಟ್ಟು ಬಾಲಕಲೋತ್ಸವದಲ್ಲಿ ಬಹುಮಾನ ಬರುವಂತೆ ಮಾಡಿದ್ದರು.ಈ ನೃತ್ಯದಲ್ಲಿ ನಾನು ಕೃಷ್ಣನ ಪಾತ್ರವನ್ನು ಮಾಡಿದ್ದೆ.ಈಗೆಲ್ಲ ಕೃಷ್ಣ ವೇಷ ಧರಿಸಿದ ಮುದ್ದು ಪುಟಾಣಿಗಳನ್ನು ನೋಡುವಾಗೆಲ್ಲ ನಾನು ಹೀಗೆ ಕಂಡಿರಬಹುದೇ ಹಾಗೆ ಇದ್ದೆನಾ ಎಂದು ಯೋಚಿಸುತ್ತೇನೆ.ಆಗ ಫೋಟೋ ಗಿಟೋ ತೆಗೆಯಲು ಯಾರಲ್ಲಾದರೂ ಕ್ಯಾಮರಾ ಇದ್ದರೆ ತಾನೇ ? ನಾನು ಕೊನೆಯ ಪಕ್ಷ ಕನ್ನಡಿಯಲ್ಲಿ ಕೂಡ ಮುಖ ನೋಡಿಕೊಂಡಿಲ್ಲ ಅಥವಾ ನೋಡಿದ್ದರೂ ಈಗ ನನಗೆ ನೆನಪಿನಲ್ಲಿ ಉಳಿದಿಲ್ಲ. ಆ ದಿನ ನೃತ್ಯ ಸ್ಪರ್ಧೆಯಲ್ಲಿ ಕೃಷ್ಣ ವೇಷ ಧರಿಸಿದ ಬೇರೆ ಶಾಲೆಯ ಹುಡುಗಿ ವೇದಿಕೆ ಪಕ್ಕ ಇದ್ದಳು.ಅವಳ ಮುಖ ನನಗೆ ನೆನಪಿದೆ ಅವಳು ತುಂಬಾ ಮುದ್ದಾಗಿ ಕಾಣುತ್ತಿದ್ದಳು. ನನಗೆ ಮುಖಕ್ಕೆ ಬಣ್ಣ ಹಾಕಿ ಕೃಷ್ಣ ವೇಷ ಹಾಕಿದ ಶ್ರೀನಿವಾಸ ಮಾಷ್ಟ್ರು, ಸರೋಜ ಟೀಚರ್ ಅವಳನ್ನು ನೋಡಿ ನಮ್ಮ ಕೃಷ್ಣನಿಗೆ ಅವಳು ಸರಿಗಟ್ಟಲಾರಳು ಎಂದು ಮೆಲ್ಲಗೆ ಮಾತಾಡಿಕೊಂಡಿದ್ದರು.ಅದು ಕೇಳಿ ನನಗೆ ಬಹಳ ಖುಷಿ ಆಗಿತ್ತು. ನಾನು ತುಂಟ  ಕೃಷ್ಣನಾಗಿ ನಗುತ್ತಾ ನೃತ್ಯ ಮಾಡಬೇಕೆಂದು ಸರೋಜಾ ಟೀಚರ್ ಹೇಳಿದ್ದರು.ಆದರೆ ಕೃಷ್ಣ ಹೇಗೆ ನಗುತ್ತಾನೆ ಎಂಬ ಬಗ್ಗೆ ಚಿತ್ರದಲ್ಲಿ ಕೂಡ ನನಗೆ ನೋಡಿ ಗೊತ್ತಿರಲಿಲ್ಲ. ನಾನು ನನ್ನ ಚೆಟ್ಟು ಹಲ್ಲು ಕಾಣುವ ಹಾಗೆ ನಗುವ ಅಭಿನಯ ಮಾಡುತ್ತಿದ್ದೆ.ಕೊನೆಗೆ ಸರೋಜಾ ಟೀಚರ್ ಕೃಷ್ಣ ಮುಗುಳು ನಗಬೇಕು ಅದು ಹೀಗೆ ಎಂದು ಅವರು ಮುಗುಳು ನಗುವಿನ ಅಭಿನಯವನ್ನು ಮಾಡಿ ತೋರಿಸಿ ನನಗೆ ಕಲಿಸಿದ್ದರು.
ವಸಂತ ಮಾಷ್ಟ್ರು ಮತ್ತು ಸರೋಜಾ ಟೀಚರ್ ತಾಳ ಟಂಕಿ ಜೊತೆಯಲ್ಲಿ ಹಾಡಿದ ಪಿಳ್ಳಂಗೋವಿಯ ಚೆಲುವ ಕೃಷ್ಣನ ಹಾಡಿಗೆ ಹೆಜ್ಜೆ ಹಾಕಿ ನಾವು ಬಹುಮಾನ ಪಡೆದೆವು.ನನ್ನ ಜೊತೆಯಲ್ಲಿ ಗೋಪಿಕಾ ಸ್ತ್ರೀಯರಾಗಿ ಹೇಮ ಮಾಲಿನಿ,ಕೃಷ್ಣ ವೇಣಿ,ಹರಿಣಾಕ್ಷಿ ಮತ್ತು ಇನ್ನೊಬ್ಬಳು ( ಹೆಸರು ಮರೆತು ಹೋಗಿದೆ) ಹೆಜ್ಜೆ ಹಾಕಿದ್ದರು.ಆಗ ನಾವು ಬಹುಮಾನ ಪಡೆದೆವೆಂದು ಬೀಗಿದ್ದೆವು.ಆದರೆ ಈಗ ಗೊತ್ತಾಗುತ್ತಿದೆ..ಅದು ನಮಗೆ ಸಿಕ್ಕ ಬಹುಮಾನವಲ್ಲ..ಅದರ ಗರಿಮೆ ನಮ್ಮ ಶಿಕ್ಷಕರಿಗೆ ಸೇರಿದ್ದು ಎಂದು. ಜೊತೆಗೆ ಅದೇ ವರ್ಷ ಶಾಲೆಯ ವಾರ್ಷಕೋತ್ಸವದಲ್ಲಿ  ಯಮ ಗರ್ವ ಭಂಗ ನಾಟಕವನ್ನು ನಮಗೆ ಹೇಳಿಕೊಟ್ಟು ಮಾಡಿಸಿದ್ದರು.ಅಂದು ಮತ್ತೊಮ್ಮೆ ವಾರ್ಷಕೋತ್ಸವದಲ್ಲಿ ಪಿಳ್ಳಂಗೋವಿಯ ಚೆಲುವ ಕೃಷ್ಣನ ಹಾಡಿಗೆ ಮತ್ತೆ ಕೃಷ್ಣ ನಾಗಿ ಹೆಜ್ಜೆ ಹಾಕಿದೆ.ಕೊನೆಯಲ್ಲಿ ಗೋಪಿಕಾ ಸ್ತ್ರೀ ಯರ ನಡುವೆ ಕೊಳಲು ಹಿಡಿದು ನಿಂತ ಅಭಿನಯ ಇತ್ತು.ಅಂದು ವಾರ್ಷಿಕೋತ್ಸವಕ್ಕೆ ಬಂದ ನನ್ನ ಅಣ್ಣ ನಂತರ ನೀನು ಕೊನೆಯಲ್ಲಿ ಕೃಷ್ಣ ಕೊಳಲು ಊದುವ ಭಂಗಿಯಲ್ಲಿ ಗೋಪಿಕಾ ಸ್ತ್ರೀ ಯರ ನಡುವೆ ನಂತದ್ದು ಭಾರೀ ಚಂದ ಕಾಣುತ್ತಾ ಇತ್ತು..ನನಗೆ ಈಗಲೂ ಕಣ್ಣಿಗೆ ಕಾಣುತ್ತಿದೆ ಎಂದು ಹೇಳಿದ್ದ.ಅದೆಲ್ಲ ನೆನಪಾಗುವಾಗ ನಾನು ಕೃಷ್ಣ ನಾಗಿ ಹೇಗೆ ಕಾಣಿಸಿದ್ದೆ ಎಂಬ ಕುತೂಹಲ ನನಗೆ ಆಗಾಗ ಕಾಡುತ್ತದೆ.
ಯಮ ಗರ್ವ ಭಂಗ ನಾಟಕದಲ್ಲಿ ನಾನು ಬಲರಾಮನಾಗಿ ಗೆಳತಿ ಹೇಮಮಾಲಿನಿ( ಈಗ ಅದೇ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಾರೆ) ಕೃಷ್ಣ ನಾಗಿ ಅಭಿನಯಿಸಿದ್ದೆವು.
ಜೊತೆಗೆ ಆಟೋಟ ಸ್ಪರ್ಧೆಗಳಲ್ಲಿ ಕೂಡ ತರಬೇತಿ ನೀಡಿ ನಮ್ಮನ್ನು ಸ್ಪರ್ಧೆಗೆ ಕರೆದೊಯ್ಯುತ್ತಾ ಇದ್ದರು.ಹಾಗಾಗಿ ನಾನು ಡಿಸ್ಕ್ ಎಸೆತ ಮತ್ತು ಎತ್ತರ ಜಿಗಿತದಲ್ಲಿ ಹಲವಾರು ಬಹುಮಾನ ಪಡೆದಿದ್ದೆ.
ಏಳನೇ ತರಗತಿಯಲ್ಲಿ ಓದುತ್ತಿರುವಾಗ ಬಹುಶಃ ಓಣಂ ರಜೆಯ ಸಂದರ್ಭದಲ್ಲಿ ನಾವು ಅಜ್ಜನ ಮನೆಯಲ್ಲಿ ಆಟಕ್ಕಾಗಿ ಸುಬ್ಬಿ ಇಂಗ್ಲಿಷ್ ಕಲ್ತದು ನಾಟಕ ರಚಿಸಿ ಅಭಿನಯಿಸಿದ್ದೆ.ಇದು ಗೊತ್ತಾಗಿ ವಸಂತ ಮಾಷ್ಟ್ರು ನನ್ನಲ್ಲಿ ಆ ನಾಟಕವನ್ನು ಅಭಿನಯಿಸಿ ತೋರಿಸುವಂತೆ ಶಾಲೆಯಲ್ಲಿ ಹೇಳಿದ್ದರು‌.ನಾನೆ ರಚಿಸಿದ ಕಾರಣ ನಾಟಕದಲ್ಲಿನ  ಆರೂ ಪಾತ್ರಗಳ ಸಂಭಾಷಣೆ ನನಗೆ ಬಾಯಿಗೆ ಬರುತ್ತಿತ್ತು. ಇಡೀ ನಾಟಕವನ್ನು ನಾನೊಬ್ಬಳೇ ಏಕ ಪಾತ್ರಾಭಿನಯದ ಮಾದರಿಯಲ್ಲಿ ಅಭಿನಯಿಸಿ ತೋರಿಸಿ ಅವರಿಂದ ಮೆಚ್ಚುಗೆ ಪಡೆದಿದ್ದೆ.ಇದಾಗಿ ಮೂವತ್ತು ವರ್ಷಗಳ ನಂತರ ಅದೇ ನಮ್ಮ ಶಾಲೆಯಲ್ಲಿ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸುಬ್ಬಿ ಇಂಗ್ಲಿಷ್ ಕಲ್ತದು ಮತ್ತು ಇತರ ನಾಟಕಗಳು ಕೃತಿ ರಚಿಸಿ ಹಠಮಾರಿ ಹುಡುಗಿ  ಯಃಕಶ್ಚಿತ್ ಲಕ್ಷ್ಮೀ  ಡಾ.ಲಕ್ಷ್ಮೀ ಜಿ ಪ್ರಸಾದ ಆಗಿ ಬದಲಾಗಲು ಪ್ರೇರಣೆ ನೀಡಿದ  ಶಿಕ್ಷಕರಿಗೆ ಅರ್ಪಣೆ ಮಾಡಿದ್ದೆ.
ನಾನು ಎಂಟನೇ ತರಗತಿಗೆ ಶ್ರೀ ವಾಣಿ ವಿಜಯ ಹೈಸ್ಕೂಲ್  ಕೊಡ್ಲ ಮೊಗರಿಗೆ ಸೇರಿ ತಾಯಿ ಮನೆಯಿಂದ ಶಾಲೆಗೆ ಹೋಗುತ್ತಿದ್ದೆ.
ಇಲ್ಲಿ ನಾನು ಆ ನಾಟಕವನ್ನು ಯುವಜನೋತ್ಸವದ ಸ್ಪರ್ಧೆಯಲ್ಲಿ ಮಾಡಿದೆ.ವಾಣಿ ವಿಜಯ ಪ್ರೌಢ ಶಾಲೆಯ ವಾತಾವರಣ ಮೀಯಪದವು ಶಾಲೆಗಿಂತ ತುಂಬಾ ಭಿನ್ನವಾಗಿತ್ತು.ಇಲ್ಲಿ ನಮಗೆ ಯಾವುದಕ್ಕೂ ಬೆಂಬಲ ಇರಲಿಲ್ಲ. ಬಹುಶಃ ಸರ್ಕಾರದ ಆದೇಶ ಇದ್ದ ಕಾರಣ ಯುವಜನೋತ್ಸವ ಮಾಡಿ ಒಂದಷ್ಟು ಸ್ಪರ್ಧೆಗಳನ್ನು ಕಷ್ಟದಲ್ಲಿ ನಡೆಸುತ್ತಾ ಇದ್ದರು.ಇಲ್ಲಿ ನಮಗೆ ತರಬೇತಿ ಪ್ರೋತ್ಸಾಹ ಎಂತದೂ ಇರಲಿಲ್ಲ. ಆದರೂ ನಾನು ಒಂದು ತಂಡ ಕಟ್ಟಿ ನಾಟಕದಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ.ಇಲ್ಲಿ ಹುಡುಗಿಯರು ವೇದಿಕೆ ಏರಲು ಹಿಂದೇಟು ಹಾಕುತ್ತಿದ್ದರು. ಅಂತೂ ಇಂತೂ ಕೆಲವರ ಮನ ಒಲಿಸಿ ನಾಟಕ ಹೇಳಿಕೊಟ್ಟು ಸಿದ್ಧ ಪಡಿಸಿದ್ದೆ.ನಮಗೆ ಅಭ್ಯಾಸ ಮಾಡಲು ಕೂಡ ಶಾಲಾ ಅವಧಿಯಲ್ಲಿ ಅವಕಾಶ ಇರಲಿಲ್ಲ. ಶಾಲೆ ಮುಗಿದ ನಂತರ ನಾವು ಬಯಲಿನಲ್ಲಿ ನಿಂತು ಅಭ್ಯಾಸ ಮಾಡಿದ್ದೆವು.ಶಾಲೆಯ ಕೊಠಡಿಯ ಒಳಗಡೆ ಅದಕ್ಕೆಲ್ಲ ಅವಕಾಶ ಇರಲಿಲ್ಲ. ಜೊತೆಗೆ  ಶರವು  ಮಹಾ ಗಣಪತಿ ಹಾಡಿಗೆ ಒಂದು ಪೂಜಾ ನೃತ್ಯಕ್ಕೂ ಹೆಜ್ಜೆ ಜೋಡಿಸಿ ತಯಾರಾಗಿದ್ದೆ.ನಾನು ಮೀಯಪದವು ಶಾಲೆಯಲ್ಲಿ ಇದ್ದಾಗ ಬೇರೆ ಮಕ್ಕಳಿಗೆ ಅಲ್ಲಿನ ಶಿಕ್ಷಕರು ಕಲಿಸಿದ್ದ ಒಂದು ಜಿಪ್ಸಿಗಳೆ ನಿಮ್ಮ ನಾವು ಮೊದಲು ಕಂಡಾಗ ಎಂಬ ಹಾಡಿನ ನೃತ್ಯವನ್ನು ಅಲ್ಲಿಯೇ ಐದು ಆರನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ಹುಡುಗಿಯರಿಗೆ ಹೇಳಿ ಕೊಟ್ಟು ಸ್ಪರ್ಧೆಗೆ ತಯಾರು ಮಾಡಿದ್ದೆ. ಈ ಹುಡುಗಿಯರ ಹೆಸರು ಮರೆತು ಹೋಗಿದೆ ಒಬ್ಬಳು ನಮ್ಮ ಮನೆ ಪಕ್ಕದ ನಳಿನಿ ಇರಬೇಕು ಜೊತೆಗೆ ರಾಜೇಶ್ವರಿ ಎಂಬ ಇನ್ನೊಂದು ಹುಡುಗಿಗೆ ಒಂದು ಪೂಜಾ ನೃತ್ಯ ಹೇಳಿ ಕೊಟ್ಟಿದ್ದೆ.
ಯುವಜನೋತ್ಸವದ ಮೊದಲ ಹಂತ ಶಾಲೆಯ ಒಳಗೆ ಸ್ಪರ್ಧೆ. ಇಲ್ಲಿ ಪ್ರಥಮ ಸ್ಥಾನ ಗಳಿಸಿದವರನ್ನ ಉಪಜಿಲ್ಲಾ ಮಟ್ಟದ ಸ್ಪರ್ಧೆಗೆ ಕರೆದು ಕೊಂಡು ಹೋಗಬೇಕಿತ್ತ ಎಂದು ನೆನಪು. ವಾಣಿ ವಿಜಯ ಹೈಸ್ಕೂಲ್ ನಲ್ಲಿ ಶಾಲೆಯ ಒಳಗೆ ಯುವಜನೋತ್ಸವ‌ ಮಾಡಿ ಸ್ಪರ್ಧೆ ನಡೆಸಿ ಬಹುಮಾನ ಕೊಡುತ್ತಾ ಇದ್ದದ್ದೇ ಕಷ್ಟದಲ್ಲಿ. ಇನ್ನು ನಮಗೆ ತರಬೇತಿಯನ್ನು ನೀಡಿ ಅಂತರ್ಶಾಲಾ ಸ್ಪರ್ಧೆಗೆ ಕರೆದೊಯ್ಯುವ ಮಾತೆಲ್ಲಿ ?
ಇರಲಿ ನನಗಾಗ ಇದನ್ನೆಲ್ಲ ಅರ್ಥಮಾಡಿಕೊಳ್ಳುವ ವಯಸ್ಸಲ್ಲ.ಮೀಯಪದವು ಶಾಲೆಯ ಹಾಗೇ ಇಲ್ಲೂ ಎಂದು ಭಾವಿಸಿದ್ದೆ‌.ಮೊದಲಿನಿಂದಲೂ ನಾನು ಒಂಚೂರು ಅತ್ಯುತ್ಸಾಹದ ಹುಡುಗಿ ಆಗಿದ್ದೆ ಕಾಣಬೇಕು.
ಯುವಜನೋತ್ಸವಕ್ಕೆ ಎರಡು ದಿನ ಇರುವಾಗ ಸುಬ್ಬಿ ಪಾತ್ರ ಮಾಡಿದ ಹುಡುಗಿ ಶೋಭಾ ನಾನು ನಾಟಕದಲ್ಲಿ ಮಾಡುವುದಿಲ್ಲ ಎಂದು ನಿರಾಕರಿಸಿದಳು.ಆಗ ಸುಬ್ಬನ ಸ್ನೇಹಿತನ ಪಾತ್ರವನ್ನು ಅಭ್ಯಾಸ ಮಾಡಿದ್ದ ಹೇಮಾಳಿಗೆ ಸುಬ್ಬಿ ಪಾತ್ರದ ಎಲ್ಲ ಸಂಭಾಷಣೆ ಬಾಯಿಗೆ ಬರುತ್ತಾ ಇತ್ತು‌‌.ಅವಳು ಸುಬ್ಬಿ ಪಾತ್ರ ಮಾಡಲು ಒಪ್ಪಿದಳು. ನನ್ನದ ಸುಬ್ಬ ಪಾತ್ರ .ಸ್ನೇಹಿತರ ಜಾಗಕ್ಕೆ ಇಬ್ಬರನ್ನು ಹೇಗೋ ಹುಡುಕಾಡಿ ಹೊಂದಾಣಿಕೆ ಮಾಡಿದೆವು.ಇಲ್ಲಿ ನನ್ನಂತೆ ಉತ್ಸಾಹದ ಹುಡುಗಿ ( ಈಗ ತಕ್ಷಣಕ್ಕೆ ಹೆಸರು ಬಾಯಿಗೆ ಬರುತ್ತಾ ಇಲ್ಲ) ಈಗ ಸುಂಕದ ಕಟ್ಟೆಯ ಶಾಲೆಯಲ್ಲಿ ಶಿಕ್ಷಕಿ ಆಗಿದ್ದಾರೆ.ನಾನು ಕೇರಳ ತುಳು ಅಕಾಡೆಮಿಯ ಕಾರ್ಯಕ್ರಮ ದಲ್ಲಿ ಇತ್ತೀಚೆಗೆ ಭೇಟಿ ಮಾಡಿ ಮಾತಾಡಿರುವೆ‌
 ಹೇಮಾಳಿಗೆ ಒಂದು ಕೊರವಂಜಿ ನೃತ್ಯ ಕೂಡ ಹೇಳಿ ಕೊಟ್ಟಿದ್ದೆ.ಅಂತೂ ಇಂತೂ ಯುವಜನೋತ್ಸವದ ಸ್ಪರ್ಧೆಯಲ್ಲಿ ನಮ್ಮ ನಾಟಕ ಪ್ರಥಮ ಬಹುಮಾನ ಪಡೆಯಿತು. ಸ್ಪರ್ಧಿಸಿದ್ದು ನಮ್ಮದು ಸೇರಿ ಮೂರು ತಂಡ ಅಷ್ಟೇ ,ಹುಡುಗಿಯರ ತಂಡ ನಮ್ಮದು ಮಾತ್ರ .ಜೊತೆಗೆ ನನ್ನ ಪೂಜಾ ನೃತ್ಯ ಮತ್ತು ಹೇಮಾಳ ಕೊರವಂಜಿ ನೃತ್ಯಕ್ಕೆ ಬೇರೆ ಸ್ಪರ್ಧಿಗಳು ಇರಲಿಲ್ಲ, ನಮಗೆ ಫಸ್ಟ್ ಸೆಕೆಂಡ್ ಬಹುಮಾನ ಕೊಟ್ಟರು.ಜಿಪ್ಪಿಗಳೆ ನಾವು ನಿಮ್ಮ ಮೊದಲು ಕಂಡಾಗ ಹಾಡಿಗೆ ನಾನು ಹೇಳಿ ಕೊಟ್ಟ ನೃತ್ಯವನ್ನು ಆ ಇಬ್ಬರು ಸಣ್ಣ ಹುಡುಗಿಯರು ಮಾಡಿದರು.ಅವರಿಗೂ ಬೇರೆ ಸ್ಪರ್ಧಿಗಳೇ ಇರಲಿಲ್ಲ, ಬಹುಶಃ ಅವರಿಗೆ ವಿಶೇಷ ಬಹುಮಾನ ಕೊಟ್ಟಿಬಹುದು.ಅಥವಾ ಮೊದಲ ಬಹುಮಾನ ಎಂದೇ ಕೊಟ್ಟಿದ್ದರೋ ಏನೋ ಗೊತ್ತಿಲ್ಲ.
ಇದು ಬಿಟ್ಟರೆ ಕಂಠ ಪಾಠ ಸ್ಪರ್ದೆ ಇತ್ತು‌.ಇದಕ್ಕೆ ಹತ್ತು ಹನ್ನೆರಡು ಜನ ಸ್ಪರ್ಧಿಗಳು ಇರುತ್ತಿದ್ದರು. ನಾನು ಈ ವಿಭಾಗದಲ್ಲೂ ಬಹುಮಾನ ಪಡೆದಿದ್ದೆ‌
ಅಂದಿನ ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಬಂದಿದ್ದ ಅಲ್ಲಿನ ನಿವೃತ್ತ ಹಿಂದಿ ಶಿಕ್ಷಕರೂ ಸಾಹಿತಿಗಳೂ ಆಗಿದ್ದ ವಿಶ್ವೇಶ್ವರ ಭಟ್ ನಮ್ಮ ನಾಟಕವನ್ನು ನೋಡಿದ್ದು ಸಮಾರೋಪ ಭಾಷಣದಲ್ಲಿ ಇಂದು ಸುಬ್ಬನ ಪಾತ್ರ ವಹಿಸಿದ ಹುಡುಗಿಗೆ ದೊಡ್ಡ ಭವಿಷ್ಯ ಇದೆ   ಎಂದು ನನ್ನ ಕುರಿತು ಮೆಚ್ಚುಗೆಯ ಮಾತನ್ನು ಹೇಳಿದರು.

ಇದು ಮೂವತ್ತೆರಡು ವರ್ಷಗಳ ಹಿಂದಿನ ಮಾತು. ಅವರಿಗೆ ನಾನು ಯಾರೆಂದು ಗೊತ್ತಿರಲಿಲ್ಲ. ಸುಬ್ಬನ ಪಾತ್ರವನ್ನು ಮಾತ್ರ ನೋಡಿದ್ದರು.ನನ್ನ ಹೆಸರು ಗೊತ್ತಿಲ್ಲದ ಕಾರಣ ಪಾತ್ರದ ಹೆಸರು ಹೇಳಿ ಮೆಚ್ಚುಗೆ ಮಾತು ಹೇಳಿದ್ದರು.ಎಲ್ಲಾ ಶಿಕ್ಷಕರೂ,ವಿದ್ಯಾರ್ಥಿಗಳೂ ದೊಡ್ಡದಾಗ ಕ್ಲಾಪ್ ಹಾಕಿದರು.
ಸಭೆಯಲ್ಲಿ ಹಿಂದಿನ ಬೆಂಚಿನಲ್ಲಿ ಕುಳಿತು ಕೇಳುತ್ತಿದ್ದ ನನಗೆ ರೋಮಾಂಚನವಾಯಿತು.
ಹೌದು ಅವರು ಹೇಳಿದ ಮಾತನ್ನು ಗಟ್ಟಿಯಾಗಿ ನೆಚ್ಚಿಕೊಂಡೆ.ಸುಬ್ಬನ ಪಾತ್ರ ಮಾಡಿದ ಹುಡುಗಿಗೆ ದೊಡ್ಡ ಭವಿಷ್ಯವಿದೆ.ಅಂದರೆ ನಾನು ಎಲ್ಲರಂತೆ ಸಾಮಾನ್ಯ ಳಾಗಿ ಇರುವುದಿಲ್ಲ, ನನಗೆ ದೊಡ್ಡ ಭವಿಷ್ಯ ಇದೆ ಎಂದು ನಾನು ನಂಬಿದೆ‌.
ಕೂಸು ಎಂತ ಓದಿದರೆಂತ ಒಲೆ ಬೂದಿ ಒಕ್ಕುದು ತಪ್ಪ
ಹುಡುಗಿ ಏನು ಓದಿದರೇನು ? ಅವಳಿಗೆ ಒಲೆ ಬೂದಿ ಗೋರುವ ಕೆಲಸ ತಪ್ಪದು ಎಂಬ ಮಾತು ನಮ್ಮಲ್ಲಿ ಪ್ರಚಲಿವಿತ್ತು.ಆದರೆ ಅಂದು ನಾನು ಕೇವಲ ಒಲೆ ಬೂದಿ ಗೋರಲು ಲಾಯಕ್ಕಾದವಳಾಗಿ ಉಳಿಯುವಿದಿಲ್ಲ..ನಾನು ಮುಂದೆ ತುಂಬಾ ಓದಬೇಕು ,ನನಗೆ ದೊಡ್ಡ ಭವಿಷ್ಯ ಸಿಗುತ್ತದೆ ಎಂದು ನಿರ್ಧರಿಸಿದೆ..
ಎಸ್ ಎಸ ಎಲ್ ಸಿಯಲ್ಲಿ ಫಸ್ಟ್ ಕ್ಲಾಸ್ ಪಡೆದು ಶಾಲೆಗೆ ದ್ವಿತೀಯ ಸ್ಥಾನ ಪಡೆದೆ.ಮುಂದೆ ಓದಿದೆ. ಇಂದು ದೊಡ್ಡ ಭವಿಷ್ಯ ಸಿಗದೇ ಇದ್ದರೂ ಕೂಡ ನಾನು ನನ್ನತನವನ್ನು ಪಡೆಯುವಷ್ಟು ಭವಿಷ್ಯವನ್ನು ಪಡೆದೆ.
ಈ ನಾಟಕ ನಡೆಯುವಾಗ ಒಂದು ಪ್ರಮಾದ ಆಗಿ ಸಭೆಯಲ್ಲಿದ್ದವರೆಲ್ಲ ನಗಾಡಿದ್ದರು.ಸುಬ್ಬನಿಗೆ ಇಬ್ಬರು ಸ್ನೇಹಿತರಯ.ಅವರು ಬಂದಾಗ ವೆಲ್ ಕಂ್ ಮೈ ಫ್ರೆಂಡ್ಸ್,ಪ್ಲೀಸ್ ಬಿ ಸೀಟೆಡ್ ಎಂದು ಹೇಳಿದಾಗ ಅವರು ಕುಳಿತುಕೊಳ್ಳಬೇಕೆಂದು ಹೇಳಿಕೊಟ್ಟಿದ್ದೆ.ಆದರೆ ಅವರಿಗೆ ಕುಳಿತುಕೊಳ್ಳಲು ಅಲ್ಲಿ ಒಂದು ಖುರ್ಚಿ ಮಾತ್ರ ಇತ್ತು.ಇಬ್ಬರೂ ಒಂದೇ ಕುರ್ಚಿಯಲ್ಲಿ  ಕುಳಿಯರು.ಅದು ಎರಡು ಕೈ ಇರುವ ಹಳೆಯ ಮರದ ಕುರ್ಚಿ. ಮುರಿಯದ್ದು ನಮ್ಮ ಪುಣ್ಯ! ನಂತರ ಅವರು ಎದ್ದು ನಿಂತು ಮಾತನಾಡಲು ಇದೆ.ಏಳ ಹೊರಟಾಗ ಟೈಟ್ ಆಗಿ ಇಬ್ಬರಿಗೂ ಏಳಲಾಗುತ್ತಿಲ್ಲ..ಇವರ ಪರಿಸ್ಥಿತಿ ನೋಡಿ ಸಭೆಯ ಮಂದಿದ ಜೊತೆಯಲ್ಲಿ ಇವರುಗಳು ನಗುತ್ತಿದ್ದಾರೆ.ನನಗೋ ಆತಂಕ ಸಿಟ್ಟು.ಕುರ್ಚಿಯ ಹಿಂಭಾಗ ನಿಂತು ಕುರ್ಚಿಯನ್ನು ಗಟ್ಟಿಯಾಗಿ ಹಿಡಿದು ಒಬ್ಬಳ ಬೆನ್ನಿಗೆ ಕುಟ್ಟಿದೆ.ಒಬಗಬಳು ಎದ್ದಳು.ಅಲ್ಲಿಗೆ ಸಮಸ್ಯೆ ಪರಿಹಾರ ಆಯ್ತು.ಅವರಿಬ್ಬರೂ ಏಕ ಕಾಲಕ್ಕೆ ಮೇಲೇಳಳು ಯತ್ನ ಮಾಡಿದ್ದರಿಂದ ಹೀಗಾಗಿತ್ತು.ತಪ್ಪು ನನ್ನದೇ ನಾನು ಅವರಿಗೆ ಕುಳಿಕೊಳ್ಳಲು ಎರಡು ಕುರ್ಚಿ ಇಡಬೇಕಾಗಿತ್್ತಯ.ಮೊದಲ ಬಾರಿಗೆ ವೇದಿಕೆ ಏರಿದ ಅವರಿಗೆ ಗೊಂದಲ ಆದದ್ದು ಸಹಜ..ನಕ್ಕದ್ದು ಮಾತ್ರ ಆಗ ತೀವ್ರ ಕೋಪ ಯರಿಸಿತ್ತು.ಆದರೆ ಸುಬ್ಬನಾಗಿ ವೇದಿಕೆ ಮೇಲೆ ಇದ್ದೆ ..ತೋರಿಸುವ ಹಾಗೆ ಇರಲಿಲ್ಲ.. ಈಗ ನೆನೆದರೆ ನಗು ಬರುತ್ತಿದೆ..ಅಂತೂ ಇಂತೂ ನಾಟಕ ಮಾಡಿ ಮೊದಲ ಬಹುಮಾನ ಪಡೆದು ಸ್ವರ್ಗ ಸಿಕ್ಕಂತೆ ಬೀಗಿದ್ದೆವು ನಾವು.

No comments:

Post a Comment